ಬೆಂಗಳೂರು, ಅ. 12: ‘ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ರಾಜರಾಜೇಶ್ವರಿನಗರ ಕ್ಷೇತ್ರದ ಶಾಸಕ ಮುನಿರತ್ನ ಅವರಿಗೆ ಮಾಡಿದ ಅಪಮಾನವಲ್ಲ, ಆ ಕ್ಷೇತ್ರದ ಮತದಾರರಿಗೆ ಮಾಡಿದ ಅಪಮಾನ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿಶ್ಲೇಷಿಸಿದ್ದಾರೆ. ರವಿವಾರ ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮುಂಬರುವ ದಿನದಲ್ಲಿ ಡಿ.ಕೆ. ಶಿವಕುಮಾರ್, ಕಾಂಗ್ರೆಸ್ ಪಕ್ಷಕ್ಕೆ ಕರಿಟೋಪಿಯ ಬೆಲೆ ಏನೆಂದು ತೋರಿಸುತ್ತೇವೆ. ಒಬ್ಬ ಉಪಮುಖ್ಯಮಂತ್ರಿ, ಜವಾಬ್ದಾರಿಯುತ ಸಚಿವರಾಗಿ ಸಾರ್ವಜನಿಕ ಸ್ಥಳದಲ್ಲಿ ಹಾಗೂ ಒಬ್ಬ ಜನಪ್ರತಿನಿಧಿ ಬಗ್ಗೆ ಹೇಗೆ ನಡೆದುಕೊಳ್ಳಬೇಕು ಎಂಬ ಕನಿಷ್ಠ ಸೌಜನ್ಯವೂ ಅವರಿಗೆ ಇಲ್ಲ ಎಂದು ಆಕ್ಷೇಪಿಸಿದರು.


