ಕಲಬುರಗಿ: ಚಿತ್ತಾಪುರ ಪಥಸಂಚಲನ ವಿವಾದವನ್ನು ಆರ್ಎಸ್ಎಸ್ ಪ್ರತಿಷ್ಠೆಯ ವಿಚಾರ ಮಾಡಿಕೊಂಡಿದೆ. ವಿದ್ಯಾರ್ಥಿಗಳ ಭವಿಷ್ಯ ಹಾಳು ಮಾಡುವ ಪ್ರಯತ್ನ ನಡೆಯುತ್ತಿದ್ದು, ಸಮಾಜದ ಶಾಂತಿ ಕಾಪಾಡುವುದು ಸರ್ಕಾರದ ಕರ್ತವ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಶುಕ್ರವಾರ ಐವಾನ್-ಇ-ಶಾಹಿ ಅತಿಥಿಗೃಹದಲ್ಲಿ ಶುಕ್ರವಾರ ಮಾಧ್ಯಮ ಮಾತನಾಡಿ, ಪಥಸಂಚಲನದಲ್ಲಿ ಭಾಗವಹಿಸಲು ಕೆಲವರಿಗೆ ಕರೆ ನೀಡಲಾಗಿದೆ. ಅದರಲ್ಲೂ ವಿದ್ಯಾರ್ಥಿಗಳಿಗೆ ಕಾಲ್ ಮಾಡಿದ್ದಾರೆ. ಆ ಬಗ್ಗೆ ವಿಚಾರಿಸಲಾಗಿದ್ದು, ಅವರಿಗೆ ದೇಶಭಕ್ತಿ ಇತ್ಯಾದಿ ಕುರಿತು ಹೇಳಲಾಗುತ್ತಿದೆ ಎನ್ನುವುದನ್ನು ಹೊರತುಪಡಿಸಿ ಬೇರೆ ಹೇಳಿರಲಿಲ್ಲ ಎನ್ನುವ ಮಾಹಿತಿ ಬಂದಿದೆ. ವಿದ್ಯಾರ್ಥಿಗಳ ಭವಿಷ್ಯದ ದೃಷ್ಠಿಯಿಂದ ಹಾಗೂ ಸಮಾಜದ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಸರ್ಕಾರಕ್ಕೆ ಪತ್ರ ಬರೆದಿದ್ದೇನೆ ಅದರಲ್ಲೇನು ತಪ್ಪಿದೆ ಎಂದರು.
ನಾನು ಸರ್ಕಾರಿ ಜಾಗದಲ್ಲಿ ಕೇವಲ ಆರ್ಎಸ್ಎಸ್ ಅಲ್ಲ, ಯಾವುದೇ ಸಂಘಟನೆಗಳು ಕಾರ್ಯಕ್ರಮ ನಡೆಸದಂತೆ ಪತ್ರ ಬರೆದಿದ್ದೇನೆ. ಅದರಲ್ಲಿ ತಪ್ಪೇನೂ ಇಲ್ಲ. ವಿದ್ಯಾರ್ಥಿಗಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ನಿರ್ಧಾರ ಕೈಗೊಂಡಿದ್ದೇನೆ. ಆದರೆ, ಬಿಜೆಪಿ ಮತ್ತು ಆರ್ಎಸ್ಎಸ್ ನನ್ನ ವಿರುದ್ಧ ಪ್ರಚಾರ ಆರಂಭಿಸಿದೆ. ನನ್ನ ಮೇಲೆ ಜೀವ ಬೆದರಿಕೆ ಹಾಕಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ, ಅವನನ್ನು ಪ್ರಚೋದಿಸಿದವರ ಮೇಲೂ ಕ್ರಮ ಅಗತ್ಯ ಎಂದು ಹೇಳಿದರು.



