Flash News

ಗಾಂಧಿಯನ್ನು ಕಾಂಗ್ರೆಸ್ ಒಂದಲ್ಲ ಹಲವಾರು ಬಾರಿ ಕೊಲೆ ಮಾಡಿದೆ: ಬೊಮ್ಮಾಯಿ

ಬೀದರ್: ಮಹಾತ್ಮಾ ಗಾಂಧೀಜಿಯವರನ್ನು ಕಾಂಗ್ರೆಸ್ ಒಂದಲ್ಲ ಹಲವಾರು ಬಾರಿ ಕೊಲೆ ಮಾಡಿದೆ. ಕಾಂಗ್ರೆಸ್ ಪಕ್ಷ ಗಾಂಧಿ ಹೆಸರನ್ನು ಹೇಳಿ ಲಾಭ ಪಡೆಯುತ್ತದೆ. ಅದೆಲ್ಲಿ ಹೋಗಿಬಿಡುತ್ತದೆ ಎನ್ನುವ ಭಯದಲ್ಲಿ ಗಾಂಧೀಜಿ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ಬೀದರ್‌ನಲ್ಲಿ ನರೇಗಾ ಯೋಜನೆಯಲ್ಲಿ ಗಾಂಧೀಜಿ ಹೆಸರು ಕೈ ಬಿಟ್ಟಿರುವ ಕುರಿತು ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದರು. ಗಾಂಧೀಜಿಯವರು ಕಾಂಗ್ರೆಸ್ ಪಕ್ಷವನ್ನು ವಿಸರ್ಜನೆ ಮಾಡಲು ಹೇಳಿದ್ದರು. ಆದರೆ ನೆಹರು ಅವರು ವಿಸರ್ಜನೆ ಮಾಡಲಿಲ್ಲ, ಅವತ್ತೇ ಗಾಂಧಿ ಕೊಲೆ ಆಯ್ತು. ತುರ್ತು ಪರಿಸ್ಥಿತಿಯನ್ನು ಜಾರಿ ಮಾಡಿ ಮತ್ತೊಂದು ಸಾರಿ ಗಾಂಧಿಯನ್ನು ಕೊಲೆ ಮಾಡಿದರು. ಹಲವಾರು ಬಾರಿ ಗಾಂಧಿ ವಿಚಾರಗಳ ವಿರುದ್ಧ ಕಾಂಗ್ರೆಸ್ ಕೆಲಸ ಮಾಡಿ ಹಲವು ಬಾರಿ ಕೊಲೆ ಮಾಡಿದೆ ಎಂದು ಆರೋಪಿಸಿದರು.

ಗಾಂಧಿ ಮತ್ತು ರಾಮನನ್ನು ಬೇರೆ ಮಾಡಿ ಕಾಂಗ್ರೆಸ್ ಪಾಪದ ಕೆಲಸ ಮಾಡುತ್ತಿದೆ. ರಾಮ ಬೇರೆಯಲ್ಲ ಗಾಂಧಿ ಬೇರೆಯಲ್ಲ, ಗಾಂಧಿ ಆತ್ಮ ರಾಮನ ಹೆಸರು ಹೇಳುತ್ತದೆ. ರಾಮನ ವಿಚಾರಗಳನ್ನು ಪ್ರತಿಪಾದಿಸಿದ ಗಾಂಧಿ ರಾಮರಾಜ್ಯದ ಪರಿಕಲ್ಪನೆಯನ್ನು ಹೇಳಿದ್ದರು. ಗಾಂಧಿಯ ಆತ್ಮದಲ್ಲಿದ್ದ ರಾಮನ ಹೆಸರನ್ನು ಇವತ್ತು ಉದ್ಯೋಗ ಖಾತ್ರಿಗೆ ಇಟ್ಟಿದ್ದೇವೆ. ಮೊದಲು ಇದಕ್ಕೆ ನೆಹರು ಹೆಸರಿತ್ತು ಚುನಾವಣೆ ಸಂದರ್ಭದಲ್ಲಿ ಗಾಂಧಿ ಹೆಸರನ್ನು ಇಟ್ಟರು. ಕಾಂಗ್ರೆಸ್ ಪಕ್ಷ ಗಾಂಧಿ ಹೆಸರನ್ನು ಹೇಳಿ ಲಾಭ ಪಡೆಯುತ್ತದೆ. ಅದೆಲ್ಲಿ ಹೋಗಿಬಿಡುತ್ತದೆ ಎನ್ನುವ ಭಯದಲ್ಲಿ ಈ ರೀತಿ ಮಾತನಾಡುತ್ತಿದ್ದಾರೆ ಎಂದರು.