ಉಳ್ಳಾಲ: ರೌಡಿಶೀಟರ್ ಓರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ತೊಕ್ಕೊಟ್ಟು ಫ್ಲೈ ಓವರ್ ಬಳಿ ಇಂದು ಬೆಳಿಗ್ಗೆ ನಡೆದಿದೆ.
ಉಚ್ಚಿಲ ಮುಳ್ಳುಗುಡ್ಡೆ ನಿವಾಸಿ ಆರೀಫ್ ಹುಸೇನ್ (42) ಯಾನೆ ಟ್ಯಾಬ್ಲೆಟ್ ಆರೀಫ್ ಕೊಲೆಯಾದ ರೌಡಿಶೀಟರ್.
ಮೃತ ಆರೀಫ್ ಮಂಗಳೂರಿನ ಬಂದರು ಪೊಲೀಸ್ ಠಾಣೆಯಲ್ಲಿ ರೌಡಿಶೀಟರ್ ಆಗಿದ್ದ. ಆರೀಫ್ ಧಕ್ಕೆಯಲ್ಲಿ ಮೀನಿನ ವ್ಯಾಪಾರ ನಡೆಸುತ್ತಿದ್ದು ಇಂದು ಬೆಳಗ್ಗೆ ಬುಲೆಟ್ ಬೈಕಿನಲ್ಲಿ ಮಂಗಳೂರಿಗೆ ತೆರಳುತ್ತಿದ್ದ ವೇಳೆ ತೊಕ್ಕೊಟ್ಟು ಓವರ್ ಬ್ರಿಡ್ಜ್ ಮೇಲ್ ಸೇತುವೆಯಲ್ಲಿ ಆತನ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಕಾರಿನಿಂದ ಹಿಂಬಾಲಿಸಿದ ತಂಡವೊಂದು ಆರೀಫನ್ನು ಕೊಲೆ ಮಾಡಿ ಪರಾರಿಯಾಗಿರುವುದಾಗಿ ಹೇಳಲಾಗಿದೆ.
ಕಳೆದ 2022ರ ಮೇ ತಿಂಗಳಲ್ಲಿ ಆರೀಫ್ ಇದೇ ರೀತಿ ಬೆಳಗ್ಗೆ ಬೈಕಲ್ಲಿ ಧಕ್ಕೆಗೆ ತೆರಳುತ್ತಿದ್ದ ವೇಳೆ ಬಜಾಲಿನ ಟೊಪ್ಪಿ ನೌಫಾಲ್ ಮತ್ತು ತಂಡವು ದಾಳಿ ನಡೆಸಿ ಚೂರಿ ಇರಿದು ಕೊಲೆಗೆ ಯತ್ನಿಸಿತ್ತು. ವಿವಾಹಿತನಾಗಿರುವ ಆರೀಫ್ ಮೂಲತಃ ಕುದ್ರೋಳಿ ನಿವಾಸಿಯಾಗಿದ್ದು ಕಳೆದ ಆರೇಳು ವರುಷದಿಂದ ಕುಟುಂಬ ಸಮೇತ ಅಜ್ಜಿನಡ್ಕ ಬಳಿಯ ಮುಳ್ಳುಗುಡ್ಡೆ ಎಂಬಲ್ಲಿ ಮನೆ ಮಾಡಿ ವಾಸವಿದ್ದ. ಘಟನಾ ಸ್ಥಳಕ್ಕೆ ಡಿಸಿಪಿ ಮಿಥುನ್, ಸೋಕೋ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.
ಮೃತ ಆರೀಫ್ ಪತ್ನಿ, ಮೂರು ಗಂಡು, ಒಂದು ಹೆಣ್ಣು ಮಗಳನ್ನ ಅಗಲಿದ್ದಾನೆ.


